
ಈ ಚಿತ್ರಕ್ಕೆ ಶ್ರೀ ಶಿವು ಅವರಿಗೆ ರಾಷ್ಟ್ರೀಯ ಮಟ್ಟದ ಛಾಯಾಚಿತ್ರಗಳ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಬಂದಿರುತ್ತದೆ. "ನೆಲದ ಮೇಲೆ ಕಾಮನಬಿಲ್ಲು" ಶೀರ್ಷಿಕೆ ಕೂಡ ಶಿವು ಅವರದ್ದೇ. ಈ ಚಿತ್ರಕ್ಕೆ ಒಂದು ಕವನ ಬರೆಯ ಬೇಕೆಂಬ ಆಸೆಯಾಗಿ ಅವರಲ್ಲಿ ಕೇಳಿಕೊಂಡಾಗ ನನಗೆ ಚಿತ್ರ ಕಳುಹಿಸಿಕೊಟ್ಟಿದ್ದಕ್ಕೆ ಅವರಿಗೆ ವಂದಿಸುತ್ತೇನೆ. ಅವರಿಗೆ ಈ ಕವನದ ಮೂಲಕ ಅಭಿನಂದನೆ ಸಲ್ಲಿಸುತ್ತೇನೆ.
ಏನೀ ನೀರಿನಾಟ ? ಏನೀ ಪ್ರಕೃತಿ ಮಾಟ?
ಏನು ಸೋಜಿಗವೀ ಒಡನಾಟ?
ಕತ್ತಲು ಬೆಳಕ ನಡುವೆ
ಕಣ್ಣ ಹಾಯಿಸಿದಾಗ ಮೋಜು
ಸುತ್ತಲು ಹರಡಿಹ ಹನಿಗಳ
ಸೆರೆ ಹಿಡಿದಿದೆ ಗಾಜು!
ತುಂತುರಿನಾಟದಲ್ಲಿ ಮೂಡಿದೆ
ಅಂಬರದಲ್ಲಿ ಕಾಮನಬಿಲ್ಲು!
ಮಕ್ಕಳಾಟದಲ್ಲಿ ಮೂಡಿದೆ
ನೆಲದ ಮೇಲೆ ಕಾಮನಬಿಲ್ಲು!
ಛಲವಿದ್ದರೆ ಸಾಕು ನಮ್ಮಲ್ಲಿ
ಸಾಧಿಸ ಬಹುದು ಏನನ್ನಾದರೂ
ಊಹಿಸಿದ್ದರೇ ಮಕ್ಕಳು ಮೊದಲು
ಮೂಡಿಸವೆವು ನೆಲದ ಮೇಲೆ ಕಾಮನಬಿಲ್ಲು!
Friday, 19 December 2008
ನೆಲದ ಮೇಲೆ ಕಾಮನಬಿಲ್ಲು
Posted By ಅಂತರ್ವಾಣಿ at 10:27 pm 15 ಜನ ಸ್ಪಂದಿಸಿರುವರು
ವಿಭಾಗ: ಕವನಗಳು, ಚಿತ್ರ ಕವನ, ವಿಶೇಷ ಕವನಗಳು
Monday, 15 December 2008
ಸಂಗಾತಿಯ ಚಿಂತೆಯಲ್ಲಿ
ಅಂದದ ತುಂಟ ಕಂಗಳು
ಕಂಬನಿ ಹಂಚದೆ;
ಸಂಕಟ ನುಂಗಿವೆ
ಸಂಗಾತಿಯ ಚಿಂತೆಯಲ್ಲಿ
ಬೆಳದಿಂಗಳಲ್ಲಿ ಸೌಂದರ್ಯವಿಲ್ಲ!
ಸಂಗೀತದಲ್ಲಿ ಇಂಚರವಿಲ್ಲ!
ಶ್ರೀಗಂಧದಲ್ಲಿ ಸುಗಂಧವಿಲ್ಲ!
ಸಂಗಾತಿಯ ಚಿಂತೆಯಲ್ಲಿ
ಬೆಂಕಿಗೆ ಸ್ಪಂದಿಸುವುದಿಲ್ಲ!
ನಿಂದಿಸುವರಿಗೆ ನಿಂದನೆಯಿಲ್ಲ!
ಅಂಗಾಂಗಗಳು ಅಂಕೆಯಿಲ್ಲಿಲ್ಲ!
ಸಂಗಾತಿಯ ಚಿಂತೆಯಲ್ಲಿ
ವಿ.ಸೂ: ಈ ಕವನದ ಪ್ರತಿಯೊಂದು ಪದವೂ ಅನುಸ್ವಾರಯುಕ್ತವಾದದ್ದು. ಹಿಂದೆ ಬರೆದ "ಅಂಬಿಗನ ಮಮತೆ"ಯ ಪಲ್ಲವಿ ಮಾತ್ರವೇ ಅನುಸ್ವಾರದಲ್ಲಿತ್ತು. ಬಹು ದಿನಗಳ ಪ್ರಯತ್ನ "ಅನುಸ್ವಾರಗಳ ಕವನ" ಈಗ ಫಲಕಾರಿಯಾಗಿದೆಯೆಂದು ಭಾವಿಸಿದ್ದೇನೆ.
Posted By ಅಂತರ್ವಾಣಿ at 10:50 pm 14 ಜನ ಸ್ಪಂದಿಸಿರುವರು
ವಿಭಾಗ: ಕವನಗಳು, ಚಿತ್ರ ಕವನ, ಪ್ರಣಯವಾಣಿ (Romantic ), ವಿಶೇಷ ಕವನಗಳು
Thursday, 11 December 2008
ಸಂವತ್ಸರ ಪೂರೈಸಿದ ಸಂತಸದಲ್ಲಿ...
ಡಿಸೆಂಬರ್ ೧೨ನೇ ಮಾಸ. ಇವತ್ತು ೧೨ ನೇ ದಿನ. ಇದಕ್ಕೆ ನನ್ನ ಬದುಕಿನಲ್ಲಿ ಒಂದು ವಿಶೇಷವಿದೆ. ಕಳೆದ ವರ್ಷ ಡಿಸೆಂಬರ್ ೧೨ ರಂದು ಮೊದಲ ಪೋಸ್ಟ್ ಮಾಡಿ ನಾನೂ ಒಬ್ಬ ಕನ್ನಡದ ಬ್ಲಾಗರ್ ಎನಿಸಿಕೊಂಡೆ. ಆದರೆ ಕವನಗಳು ಅದಕ್ಕಿಂತ ಮುಂಚೆಯೇ ಇದ್ದವು. ಬ್ಲಾಗು ಶುರುಮಾಡಿದಾಗ ನನ್ನ ಕಾವ್ಯನಾಮವಾದ "ಅಗ್ರಜ" ಅಂತ ಇಟ್ಟಿದ್ದೆ. ಆಮೇಲೆ ಅದು ಹೋಗಿ ಬೇರೊಂದು ಹೆಸರು ಇಟ್ಟೆ. ಅದೂ ಸಮಾಧಾನ ಸಿಕ್ಕಿರಲಿಲ್ಲ. ಸುಮಾರು ೨೦ ಪೋಸ್ಟ್ ಆದ ಮೇಲೆ, "ಅಂತರ್ವಾಣಿ" ಪದ ಸಿಕ್ಕಿತು. ತುಂಬಾ ಹಿಡಿಸಿತು ಹಾಗು ಸೂಕ್ತ ಅನಿಸಿತು. ಹೀಗೆ ಬರೆಯುತ್ತಾ ಒಂದು ವರ್ಷ ಕಳೆದೇ ಹೋಯಿತು.
ಮೊದಲಿನಿಂದ ನನ್ನ ಬ್ಲಾಗನ್ನು ಓದಿದವರಲ್ಲಿ ಮೊದಲ ಸ್ಥಾನವನ್ನು ಕುಮಾರಿ ಲಕ್ಷ್ಮಿ ಪಡೆದಿರುತ್ತಾರೆ. ಅವರ ನಂತರದಲ್ಲಿ ಕುಮಾರಿ ಪುಷ್ಟ, ಶ್ರೀ ಸುಧೀರ್, ಶ್ರೀ ಶಿವ ಹಂಚಿಕೊಂಡಿರುತ್ತಾರೆ. ಆರ್ಕುಟ್, ಕನ್ನಡಿಗರು.ಕಾಂ ಹಾಗು ಮಜಾ ಮಾಡಿ ತಾಣದಲ್ಲಿ ಸಿಕ್ಕ ಅನೇಕ "ಬೆಮಿ" [ಬೆರಳಂಚಿನ ಮಿತ್ರರು] ಓದಿ ಪ್ರೋತ್ಸಾಹಿಸಿದ್ದಾರೆ. ಇವರಲ್ಲಿ ಶ್ರೀ ತ.ವಿ.ಶ್ರೀ, ಶ್ರೀ ಮಧು, ಶ್ರೀಮತಿ ಲಿಲ್ಲಿ ಇದ್ದಾರೆ. ಈ ಸಮಯದಲ್ಲೇ ಶ್ರೀಮತಿ ತೇಜಸ್ವಿನಿ ಅವರ ಪರಿಚಯವಾಯಿತು. ಅಂದಿನಿಂದ ನನ್ನೆಲ್ಲಾ ಕವನಗಳನ್ನು, ಲೇಖನಗಳನ್ನೂ ಓದಿ ತಪ್ಪುಗಳನ್ನು ತಿದ್ದಿ, ನನಗೆ ಪ್ರೋತ್ಸಾಹಿಸುತ್ತಾಯಿದ್ದಾರೆ. ನಂತರ ನನ್ನೀ ಚಿಕ್ಕ ಬ್ಲಾಗು ಶ್ರೀ ಅರುಣ್, ಶ್ರೀ ಹರೀಶ್ , ಶ್ರೀ ಸುನಾಥಂಕಲ್, ಶ್ರೀ ರಾಜು, ಶ್ರೀ ಶಿವಣ್ಣ, ಶ್ರೀ ಪ್ರಕಾಶಣ್ಣ , ಶ್ರೀ ಸುಧೇಶ್ ಕಣ್ಣಿಗೂ ಬಿದ್ದಿದೆ. ಇವರೆಲ್ಲರ ಸತತ ಪ್ರೋತ್ಸಾಹದಿಂದ ಹೆಚ್ಚು ಬರೆಯ ಬೇಕೆಂಬ ಬಯಕೆ ಮನಕ್ಕಾಗಿದೆ.
ನನಗೆ ಪ್ರೋತ್ಸಾಹ ನೀಡುತ್ತಾ ಬಂದಿರು ಎಲ್ಲರಿಗೂ ಹೃತ್ಪೂರ್ವಕ ವಂದನೆಗಳು.
"ಅಂತರ್ವಾಣಿ" ಪದಕ್ಕೆ ನಾ ಬರೆದ ಕವನ:
"ಹೇಳುವೆನು ನನ್ನೀ ಅಂತರ್ವಾಣಿಯ
ಕೇಳಿದರು ಸರಿ, ಕೇಳದಿದ್ದರೂ ಸರಿ
ಬರೆಯುವೆನು ನನ್ನೀ ಚೇತನವಿರುವವರೆಗೂ
ಓದಿದರು ಸರಿ, ಓದದಿದ್ದರೂ ಸರಿ"
Posted By ಅಂತರ್ವಾಣಿ at 9:57 pm 17 ಜನ ಸ್ಪಂದಿಸಿರುವರು
ವಿಭಾಗ: ಲೇಖನಗಳು
Sunday, 7 December 2008
ಕಲ್ಲಿಗೊಂದು ಕೊಕ್ಕರೆ
ನಮ್ಮ ಮನೆಯ ಎದುರು ಇರುವ ಕೊಳಕು ನೀರಿನಿಂದಾದ ಕೊಳದಲ್ಲಿ ಈ ಮಿತ್ರರು ಸಂಸಾರ ಹೂಡಿದ್ದಾರೆ. (ಹಿಂದೆ ಇದೇ ಕೊಳದಲ್ಲಿ ಕಪ್ಪೆಗಳು ಇದ್ದವು.) ಅವರ ಮಾತುಕತೆ ಅವರಿಂದಲೇ ಕೇಳಿ.
[ಹಾರ ಬೇಡಿ... ಇರಿ ಫೋಟೋ ತೆಗಿತಾನಂತೆ..]
[ನೀವು ಹಾರಿಬಿಟ್ರಾ? ನಿಮಗೂ ಇಲ್ಲ ಅದೃಷ್ಟ!]
[ಅಯ್ಯೋ! ಎಷ್ಟು ಹೇಳಿದರೂ ಕೇಳೋದಿಲ್ವಲ್ಲಾ ನೀವುಗಳು...ಬನ್ನಿ Group ಫೋಟೋ ತೆಗೆಸಿಕೊಳ್ಳೋಣ....]
ವಿ.ಸೂ: ಫೋಟೋಗ್ರಾಫಿ ಒಂದು ಹವ್ಯಾಸವಷ್ಟೇ.
Posted By ಅಂತರ್ವಾಣಿ at 6:41 pm 10 ಜನ ಸ್ಪಂದಿಸಿರುವರು
ವಿಭಾಗ: ಇತರೆ
